Monday, March 16, 2026
Google search engine
Homeಮುಖಪುಟಪಿಎಸ್ಐ ನೇಮಕಾತಿ ರದ್ದತಿ ವಿಚಾರ - ದೊಡ್ಡ ಕುಳಗಳ ಬಗ್ಗೆ ಮಾತನಾಡದ ಗೃಹ ಸಚಿವರು -...

ಪಿಎಸ್ಐ ನೇಮಕಾತಿ ರದ್ದತಿ ವಿಚಾರ – ದೊಡ್ಡ ಕುಳಗಳ ಬಗ್ಗೆ ಮಾತನಾಡದ ಗೃಹ ಸಚಿವರು – ರಾಮಲಿಂಗಾರೆಡ್ಡಿ

ಪಿಎಸ್ಐ ನೇಮಕಾತಿ ಪಟ್ಟಿ ರದ್ದು ಮಾಡಿರುವ ಗೃಹ ಸಚಿವರು ಈ ಅಕ್ರಮ ಕಾರಣವಾದ ದೊಡ್ಡದೊಡ್ಡ ಕುಳಗಳ ಬಗ್ಗೆ ಚಕಾರ ಎತ್ತುತ್ತಿಲ್ಲ ಏಕೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ನೇಮಕಾತಿ ಮಾಡಿದ್ದು ಪೊಲೀಸ್ ಇಲಾಖೆ, ಅಕ್ರಮದಲ್ಲಿ ಶಾಮೀಲಾಗಿರುವವರೂ ಪೊಲೀಸರೇ, ತನಿಖೆ ನಡೆಸುತ್ತಿರುವವರು ಪೊಲೀಸರು ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಸೇರಿದವರು. ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಯಲು ಹೇಗೆ ಸಾಧ್ಯ ಎಂದು ಹೇಳಿದ್ದಾರೆ.

ದೊಡ್ಡ ಅಧಿಕಾರಿಗಳು, ಆಡಳಿತ ಪಕ್ಷದ ಪ್ರಭಾವಿ ರಾಜಕಾರಣಿಗಳೇ ಇದರಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಸರ್ಕಾರದ ನೇರ ನಿಯಂತ್ರಣದಲ್ಲಿ ಇರುವ ಸಿಐಡಿಯಿಂದ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ತಿಳಿಸಿದ್ದಾರೆ.

ತನಿಖೆ ಆರಂಭವಾಗಿ ಇಷ್ಟು ದಿನವಾದರೂ ಒಂದು ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲು ಸಿಐಡಿ ತನಿಖೆ ಸಂಸ್ಥೆಗೆ ಸಾಧ್ಯವಾಗಿಲ್ಲ ಏಕೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಬರೀ ಕಲಬುರ್ಗಿ ಅಷ್ಟೇ ಅಲ್ಲ ಬೆಂಗಳೂರಿನ ಕೇಂದ್ರವೊಂದರಲ್ಲೂ ಅಕ್ರಮ ನಡೆದಿರುವ ದೂರುಗಳಿವೆ. ಈ ಬಗ್ಗೆಯೂ ಉನ್ನತ ತನಿಖೆಯ ಅಗತ್ಯವಿದೆ ಎಂದು ಆಗ್ರಹಿಸಿದ್ದಾರೆ.

ನೇಮಕಾತಿ ಉಸ್ತುವಾರಿ ಅಧಿಕಾರಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಸರ್ಕಾರ ವರ್ಗಾಯಿಸಿದ್ದು ಯಾಕೆ? ಅವರನ್ನು ಸಾಮಾನ್ಯ ವರ್ಗಾವಣೆ ಪದ್ದತಿಯಲ್ಲಿ ವರ್ಗಾಯಿಸಲಾಗಿದೆ. ಹಗರಣಕ್ಕೂ ಈ ವರ್ಗಾವಣೆಗೂ ಸಂಬಂಧವಿಲ್ಲ ಎಂದು ಸಿಎಂ ಹೇಳುವ ಮೂಲಕ ಅಕ್ರಮದ ಹೊಣೆ ಹೊರಬೇಕಾಗಿದ್ದ ಅಧಿಕಾರಿಯನ್ನು ಸಮರ್ಥಿಸಿದಂತೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ:

ಈ ಎಲ್ಲಾ ಬೆಳವಣಿಗೆಗಳು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನಗಳ ಭಾಗವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರೊಬ್ಬ ಮೇಲ್ವಿಚಾರಣೆಯಲ್ಲಿ ಸಿಐಡಿ ತಂಡ ರಚಿಸಿ ತನಿಖೆ ನಡೆಸಬೇಕು. ಆಗ ಮಾತ್ರ ಸತ್ಯ ಹೊರಬೀಳುತ್ತದೆ ಎಂದು ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular