ಪಿಎಸ್ಐ ನೇಮಕ ಅಕ್ರಮದಲ್ಲಿ ಸಚಿವರ ಸಂಬಂಧಿ ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ಇದು ಸತ್ಯವಿರಬಹುದು ಇಲ್ಲದೆಯೂ ಇರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪಿಎಸ್ಐ ನೇಮಕ ಪರೀಕ್ಷೆಯಲ್ಲಿ ಒಂದೇ ತಾಲ್ಲೂಕಿನ ಮೂವರು ಆಯ್ಕೆಯಾಗಿದ್ದು ಅವರು ಆಸ್ತಿ ಮಾರಿ ಹಣ ನೀಡಿರುವುದು ಇಡೀ ಊರಿಗೆ ಗೊತ್ತಿರುವ ವಿಚಾರ. ಈ ವಿಚಾರವಾಗಿ ನಾನು ನೋಟಿಸ್ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ನನಗೆ ಸಾಕಷ್ಟು ಕರೆಗಳು ಬರುತ್ತಿದ್ದು, ಆಯ್ಕೆಯಾಗಿದ್ದ ಅಭ್ಯರ್ಥಿ ತಂದೆ ಈ ರೀತಿ ಆಯ್ತಲ್ಲ ಎಂದು ಹಾಸಿಗೆ ಹಿಡಿದಿದ್ದಾರೆ. ಮತ್ತೊಬ್ಬರನ್ನು ಪ್ರಭಾವಿ ವ್ಯಕ್ತಿಗಳ ಪ್ರಭಾವ ಬಳಸಿ ಪೊಲೀಸರ ತನಿಖೆಯಿಂದ ಬಿಡಿಸಲಾಗಿದೆ. ಪ್ರಭಾವ ಬೀರಿದವರು ಯಾರು ಎಂದು ನನಗೆ ಗೊತ್ತಿಲ್ಲ. ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಿಐಡಿ ಎಷ್ಟು ಪ್ರಾಮಾಣಿಕವಾಗಿ ಈ ಪ್ರಕರಣದ ತನಿಖೆ ಮಾಡುತ್ತದೆ ಎಂಬುದು ಈಗ ಬಹಳ ಮುಖ್ಯ ಎಂದಿದ್ದಾರೆ.
ಸರ್ಕಾರ ತನಿಖೆ ಮಾಡಿ ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಪ್ರಕಟಿಸುವ ಮುನ್ನವೇ ಪರೀಕ್ಷೆ ರದ್ದುಮಾಡಿ ಮರು ಪರೀಕ್ಷೆಗೆ ಆದೇಶಿಸಿದ್ದಾರೆ. ಈ ನಿರ್ಧಾರದ ಮೂಲಕ ಸರ್ಕಾರ ಕಾನೂನು ವ್ಯಾಜ್ಯಕ್ಕೆ ದಾರಿ ಮಾಡಿಕೊಡುತ್ತಿದೆ. ಜತೆಗೆ ಪ್ರಭಾವಿಗಳನ್ನು ರಕ್ಷಿಸುವ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ.
ಪೊಲೀಸ್ ಇಲಾಖೆಗೆ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕರೇ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪೊಲೀಸ್ ಮಹಾನಿರ್ದೇಶಕರು, ಗೃಹ ಸಚಿವರ ಹೇಳಿಕೆಗಳು ಭಿನ್ನವಾಗಿರುವುದು ಉತ್ತಮ ಆಡಳಿತವೇ ಎಂದು ಪ್ರಶ್ನಿಸಿದರು.
ಅಭ್ಯರ್ಥಿ ವಿಚಾರಣೆಗೆ ಕೊಟ್ಟ ನೋಟೀಸ್ ನಲ್ಲಿ ಅವರ ಹೆಸರಿದೆ. ಸಿಐಡಿ ಅಧಿಕಾರಿಗಳು ಬಂಧಿತ ಅಭ್ಯರ್ಥಿಗಳ ಊರಿಗೆ ಹೋಗಿ ಅಲ್ಲಿ ತನಿಖೆ ಮಾಡಿಲ್ಲ. ಅವರು ಅಷ್ಟು ಹಣ ಹೇಗೆ ಕೊಟ್ಟಿದ್ದಾರೆ ಎಂಬ ತನಿಖೆಯನ್ನು ಮಾಡಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿಗಳಿಗೆ ಬದ್ದತೆ ಇದ್ದರೆ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದು ಬಿಜೆಪಿ ಶಾಸಕರು, ನಾಯಕರು, ಮಂತ್ರಿಗಳಾಗಿರಲಿ, ಕಾಂಗ್ರೆಸ್, ಜೆಡಿಎಸ್ ನವರಾಗಿರಲಿ, ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.