ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.
ಶಾಸಕ ಶ್ರೀನಿವಾಸಗೌಡ ಕೆಜಿಎಫ್ ಜನರ ಭಾವನೆಗಳಿಗೆ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಇವರಿಗೆ ಮಾನಮರ್ಯಾದೆ, ನೈತಿಕತೆ ಇದೆಯೇ ಎಂದು ಖಾರವಾಗಿ ನುಡಿದರು.
ಗುಬ್ಬಿಯ ಶಾಸಕ ಎಸ್.ಆರ್.ಶ್ರೀನಿವಾಸ್ ಕೂಡ ಕಾಂಗ್ರೆಸ್ ಅಭ್ಯರ್ಥಿಗೆ ಹಾಕಿದ್ದಾರೆ. ನಮಗೆ ಜೆಡಿಎಸ್ ಗೆ ಮತ ಚಲಾಯಿಸಿದ್ದೇನೆ ಎಂದು ಸುಳ್ಳು ಹೇಳಿದ್ದಾರೆ. ಇವರಿಗೆ ನಾಚಿಕೆ ಆಗಬೇಕು. ನಮ್ಮ ಪಕ್ಷದಲ್ಲಿದ್ದುಕೊಂಡು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎಂದರು.
ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿರುವು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಕ್ರಮ ಕೈಗೊಳ್ಳುವುದರಿಂದ ಪರಿಹಾರ ಸಿಗುವುದಾದರೆ ಕೈಗೊಳ್ಳಬಹುದು. ಅದರಿಂದ ಪ್ರಯೋಜನವಿಲ್ಲ. ಅದರ ಬದಲು ಪಕ್ಷ ಬಿಟ್ಟು ಹೋಗಲಿ ಎಂದು ಹೇಳಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಅವರಿಗೆ ಮಾನಮರ್ಯಾದೆ ಇಲ್ಲ. ಯಾವ ಮುಖ ಇಟ್ಟುಕೊಂಡು ಜೆಡಿಎಸ್ ಶಾಸಕರ ಮತ ಕೇಳಿದರು. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲಲಿ ಎಂಬುದು ಸಿದ್ದರಾಮಯ್ಯ ನಿಲುವು. ಬಿಜೆಪಿ ಅಭ್ಯರ್ಥಿ ಗೆದ್ದರೆ ಅದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಕಿಡಿ ಕಾರಿದರು.
ಇಬ್ಬರು ಕ್ರಾಸ್ ಓಟಿಂಗ್ ಮಾಡುತ್ತಾರೆ ಎಂಬುದು ಮೊದಲೇ ತಿಳಿದಿತ್ತು. ಹಾಗೆಯೇ ಆಗಿದೆ. ಕಾರ್ಯಕರ್ತರಿಗೆ ಕ್ಷೇತ್ರದ ಜನರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಇಲ್ಲಿಂದ ಹೊಸ ಅಧ್ಯಾಯ ಶುರುವಾಗುತ್ತದೆ. ಜನರೇ ಹೊಸ ಅಧ್ಯಾಯ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.