ಇತ್ತೀಚಿನ ದಿನಗಳಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಾಧೀಶರ ಮೇಲೆ ನಡೆಯುತ್ತಿರುವ ದಾಳಿ ಕಾಕತಾಳಿಯವಲ್ಲ. ಇದು ಬಿಜೆಪಿಯ ಸಂಘಟಿತ ಹಾಗೂ ಪೂರ್ವನಿಯೋಜಿತ ದಾಳಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಮಾನು ಸಿಂಘ್ವಿ ಆರೋಪಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಂಗವನ್ನು ಟ್ರೋಲ್ ಮಾಡುವ ಸಂದೇಶಗಳನ್ನು ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಎಲ್ಲೆಡೆ ಪಸರಿಸುತ್ತಿದ್ದಾರೆ ಎಂದು ದೂರಿದರು.
ಈ ಅಭಿಯಾನದ ಹಿಂದೆ ನ್ಯಾಯಾಂಗದ ನೈತಿಕ ಸ್ಥೈರ್ಯ ಕುಗ್ಗಿಸುವ, ಒತ್ತಡ ಹೇರುವ ಮತ್ತು ಬೆದರಿಸುವ ಉದ್ದೇಶ ಅಡಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರವು ಆಡಳಿತ ವೈಫಲ್ಯ, ದೇಶದ ನಾಗರಿಕರು ಹಾಗೂ ಎಲ್ಲಾ ವರ್ಗದಿಂದದ ಪ್ರತಿರೋಧ ಎದುರಿಸುತ್ತಿದೆ. ನಿರುದ್ಯೋಗ, ಹಣದುಬ್ಬರ, ಸಾಆಜಿಕ ಹೋರಾಟ ವಿಚಾರಗಳಿಂದ ದಿನನಿತ್ಯ ಉದ್ಭವಿಸುತ್ತಿರುವ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು, ಅವಿತುಕೊಳ್ಳಲು ಮೋದಿ ಸರ್ಕಾರ ಇಂತಹ ನೀಚ ಅಭಿಯಾನಗಳನ್ನು ನಡೆಸುತ್ತಿದೆ ಎಂದು ಟೀಕಿಸಿದರು.
ಇತ್ತೀಚಿನ ಬೆಳವಣಿಗೆಗಳು ಬಿಜೆಪಿ ಪಾಲಿಗೆ ಅನುಕೂಲಕರವಾಗಿಲ್ಲ. ಉದಯಪುರದಲ್ಲಿನ ಹತ್ಯೆ ಪ್ರಕರಣದಲ್ಲಿ ಪ್ರಚಾರ ಪಡೆಯಲು ಬಿಜೆಪಿ ಮುಂದಾಗಿತ್ತು. ಆದರೆ ಹಂತಕರು ಬಿಜೆಪಿಯ ಸದಸ್ಯರು ಎಂಬ ವಿಚಾರ ಬೆಳಕಿಗೆ ಬಂದಿತು. ಕಾಶ್ಮೀರದಲ್ಲಿ ಕುಖ್ಯಾತ ಲಷ್ಕರ್ ಉಗ್ರಗಾಮಿ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಎಂಬುದು ಬೆಳಕಿಗೆ ಬಂದಿದೆ. ಇದೆಲ್ಲದರ ಮಧ್ಯೆ ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಕಲಿ ರಾಷ್ಟ್ರೀಯತೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ತಿಳಿಸಿದರು.
ನೂಪುರ್ ಶರ್ಮಾ ಅವರು ನ್ಯಾಯಾಲಯದಲ್ಲಿ ಅರ್ಜಿ ಹಾಕಿದಾಗ ಆ ಅರ್ಜಿಯನ್ನು ತಿರಸ್ಕರಿಸಿದ ಪೀಠವು ಅದಕ್ಕೆ ಸೂಕ್ತ ಕಾರಣವನ್ನು ತಿಳಿಸಿತ್ತು. ಅದು ಆ ಪೀಠದ ಹಕ್ಕು ಕೂಡ ಆಗಿದೆ. ಈ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ಸರ್ಕಾರದ ನಡೆ ಏನಾಗಬೇಕಿತ್ತು? ಜವಾಬ್ದಾರಿಯುತ ಪಕ್ಷ ಏನು ಮಾಡಬೇಕಿತ್ತು. ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಪ್ರಾಮಾಣಿಕ ಹಾಗೂ ನೇರ ನುಡಿಯಲ್ಲಿ ಟೀಕಿಸಿದಾಗ ಬಿಜೆಪಿ ಆತ್ವಾವಲೋಕನ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದರು.
ಬಿಜೆಪಿಯ ಟ್ರೋಲ್ ಪಡೆಗಲು ನ್ಯಾಯಾಧೀಶರ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಟ್ಟರು. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ತಿರುಚಿ ಸುಳ್ಳು ಸುದ್ದಿ ಪ್ರಸಾರ ಮಾಡಿದರು. ನಂತರ ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಂಗ ನಿಂದನೆಯ ಹೇಳಿಕೆಗಳನ್ನು ಪ್ರಟಿಸಿದರು ಎಂದು ಹೇಳಿದ್ದಾರೆ.


